ಬಳ್ಳಾರಿ, ಜು.28: ಆಸಕ್ತಿಯ ವಿಷಯವನ್ನು ಶ್ರದ್ಧೆಯಿಂದ ಅಧ್ಯಯನ ಮಾಡಿದಾಗ ಮಾತ್ರ ವ್ಯಕ್ತಿ ವಿಶಿಷ್ಟ ಸಾಧನೆ ಮಾಡಲು ಸಾಧ್ಯ ಎಂದು ಕನ್ನಡ ಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರ ಕೆ.ಎಂ. ಮಂಜುನಾಥ ಅಭಿಪ್ರಾಯಪಟ್ಟರು.
ನಗರದ ಇಂಡೋ ಅಮೆರಿಕನ್ ಪದವಿ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಅಖಂಡ ಬಳ್ಳಾರಿ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ವ್ಯಾಕರಣ ಚಂದ್ರಶೇಖರಶಾಸ್ತ್ರಿಗಳ ಸ್ಮಾರಕ ದತ್ತಿ ಹಾಗೂ ದಿ. ಸಿರಿಗೇರಿ ಬಸವರಾಜ ಸ್ಮಾರಕ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಹಿತ್ಯ ಮತ್ತು ಸಂಸ್ಕೃತಿಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡವರು ಮಾತ್ರ ಜವಾಬ್ದಾರಿಯುತ ನಾಗರಿಕರಾಗಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
'ಕನ್ನಡ ಸಾಹಿತ್ಯದಲ್ಲಿ ಸಾಮರಸ್ಯದ ನೆಲೆಗಳು' ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದ ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಕೆ.ಬಿ. ಸಿದ್ಧಲಿಂಗಪ್ಪ, ವೈರುಧ್ಯ ಮತ್ತು ವಿಷಮ ಪರಿಸ್ಥಿತಿಗಳ ನಡುವೆ ಬದುಕುತ್ತಿರುವ ಸಮಾಜಕ್ಕೆ ಸಮಾನತೆ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಕನ್ನಡ ಸಾಹಿತ್ಯ ಸಮೃದ್ಧವಾಗಿ ನೀಡುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಂಡೋ ಅಮೆರಿಕನ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ವಿ. ರಾಜೇಶ್ ಮಾತನಾಡಿ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ತಮ್ಮ ಕಾಲೇಜು ಸದಾ ಪ್ರೋತ್ಸಾಹ ನೀಡಲಿದೆ ಎಂದು ಹೇಳಿದರು.
ಕೆ.ಎಸ್.ಆರ್.ಟಿ.ಸಿ. ಕಾರ್ಮಿಕ ಕಲ್ಯಾಣಾಧಿಕಾರಿ ಕರೇಗೌಡ, ಪದವಿ ಕಾಲೇಜಿನ ಪ್ರಾಂಶುಪಾಲ ಕೆ.ಪಿ. ಸುಧೀರ್ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಂಗಭೂಮಿಯ ಹಿರಿಯ ಕಲಾವಿದ ಹೆಚ್.ಎಂ. ರಾಮೇಶ್ವರಯ್ಯ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಸಾಪ ಕೋಶಾಧ್ಯಕ್ಷ ಬಸವರಾಜ ಗದಗಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಸಾಪ ಸಂಚಾಲಕ ಕಪ್ಪಗಲ್ಲು ಬಿ. ಚಂದ್ರಶೇಖರಚಾರ್ ಸ್ವಾಗತಿಸಿದರು. ಇಂಡೋ ಅಮೆರಿಕನ್ ಪದವಿ ಕಾಲೇಜಿನ ಕನ್ನಡ ಅಧ್ಯಾಪಕ ಅಮಾತಿ ಬಸವರಾಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.