ಬಳ್ಳಾರಿ,ಜು.20. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಪ್ರಮುಖವಾಗಿದ್ದು, ಅರ್ಹ ನಾಗರಿಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಲು ಮತ್ತು ಅಗತ್ಯ ತಿದ್ದುಪಡಿಗಳನ್ನು ತಂದುಕೊಳ್ಳಲು ಇದು ಸಕಾಲವಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಅವರು ಹೇಳಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ ಸಹಯೋಗದೊಂದಿಗೆ ಬಿಎಂಸಿಆರ್ಸಿ ಸಭಾಂಗಣದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಅಪೌಷ್ಟಿಕತೆ ನಿರ್ಮೂಲನಾ ಕಾರ್ಯಕ್ರಮದೊಂದಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಕುರಿತು ಭಾನುವಾರ ಹಮ್ಮಿಕೊಂಡಿದ್ದ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಳಮಟ್ಟದಲ್ಲಿ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ಕುರಿತು ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಅವರು ಕರೆ ನೀಡಿದರು.
ಪ್ರತಿಯೊಬ್ಬ ಅರ್ಹ ಮತದಾರನೂ ಮತದಾನದ ಹಕ್ಕು ಪಡೆಯುವಂತಾಗಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಹಾಯಕ ನಿರ್ದೇಶಕ ಎಂ. ಬಸವರಾಜ ಹಿರೇಮಠ, ಬಿಎಂಸಿಆರ್ಸಿ ಯ ಮಕ್ಕಳ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕ ಡಾ.ದುರ್ಗಪ್ಪ, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ. ಅಬ್ದುಲ್, ಬಿಎಂಸಿಆರ್ಸಿ ಯ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ, ಐಎಪಿ ಡಾ. ರಾಜೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಎಸ್ಐಆರ್ ಮತ್ತು ಸ್ವೀಪ್ ಅಭಿಯಾನದ ಉದ್ದೇಶಗಳನ್ನು ಮನವರಿಕೆ ಮಾಡಿಕೊಡಲಾಯಿತು.