ಬಳ್ಳಾರಿ01 ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆಯು ಆಗಸ್ಟ್ 2 ರಂದು ನಡೆಯಲಿದ್ದು, ಪರೀಕ್ಷೆಯನ್ನು ಅಕ್ರಮ ಮುಕ್ತವಾಗಿ ಹಾಗೂ ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಆದೇಶವನ್ನು ಹೊರಡಿಸಲಾಗಿದೆ.
ಅಂದು ಬೆಳಿಗ್ಗೆ 10.30 ರಿಂದ 12 ಗಂಟೆಯ ವರೆಗೆ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್ - ಮಿಕ್ಕುಳಿದ ವೃಂದ) ಪರೀಕ್ಷೆ ಮತ್ತು ಸಂಜೆ 04 ರಿಂದ 05.30 ಗಂಟೆಯ ವರೆಗೆ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್ - ಸ್ಥಳೀಯ ವೃಂದ) ಪರೀಕ್ಷೆ ನಡೆಯಲಿವೆ.
ಬಳ್ಳಾರಿ ಜಿಲ್ಲೆಯಾದ್ಯಂತ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್ನೆಟ್ ಸೆಂಟರ್ಗಳು ಕಾರ್ಯನಿರ್ವಹಿಸದಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಮತ್ತು ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಪ್ರತಿಬಂಧಿಸಲಾಗಿದೆ.
ಈ ನಿಷೇಧಾಜ್ಞೆ ಆದೇಶವು ಪರೀಕ್ಷಾ ಕರ್ತವ್ಯದಲ್ಲಿ ನಿರತರಾಗಿರುವ ಮೇಲ್ವಿಚಾರಕರು ಹಾಗೂ ಸಂಬAಧಪಟ್ಟ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.