ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ನಿಗಮದ 21 ಕೋಟಿ ರೂ. ಹಣವನ್ನು ಬಳ್ಳಾರಿ ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ವಿಚಾರ ಇಡಿ ಬಯಲು ಮಾಡುತ್ತಿದ್ದಂತೆ ಕರ್ನಾಟಕ ಬಿಜೆಪಿ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.
ಮಾಜಿ ಸಚಿವ ಬಿ. ನಾಗೇಂದ್ರ ತಲೆದಂಡ ಬಳಿಕ ರಾಜ್ಯ ಬಿಜೆಪಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಇ. ತುಕಾರಂ ಅವರನ್ನು ಟಾರ್ಗೆಟ್ ಮಾಡಿದೆ. ಮಾಜಿ ಸಚಿವ ಶ್ರೀರಾಮುಲು ಸಂಸದ ತುಕಾರಾಂ ವಿರುದ್ಧ ಕೋರ್ಟ್ನಲ್ಲಿ ದಾವೆ ಹೂಡಲು ಮುಂದಾಗಿದ್ದಾರೆ. ಬಳ್ಳಾರಿ ಸಂಸದ ಸ್ಥಾನವನ್ನು ಅನರ್ಹಗೊಳಿಸುವಂತೆ ದಾವೆ ಹೂಡಲು ಸಿದ್ದರಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಮತ್ತೊಂದು ಕಡೆ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಬಿಜೆಪಿ ನಿಯೋಗಕ್ಕೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್ ಹಿರೇಹಾಳ್ ಸಾಥ್ ನೀಡುವ ಸಾಧ್ಯತೆ ಇದೆ. ವಾಲ್ಮಿಕಿ ನಿಗಮದ ಹಣ ಹಾಗೂ ಪರಿಶಿಷ್ಟ ಕಲ್ಯಾಣ ನಿಧಿ ಚುನಾವಣಾ ಅಕ್ರಮಕ್ಕೆ ಬಳಕೆಯಾಗಿದೆ ಎಂದು ಆರೋಪಿಸಿ ಅರುಣ್ ಹಿರೇಹಾಳ್ ಈ ಹಿಂದೆ ಚುನಾವಣಾ ಆಯೋಗಕ್ಕೆ ತಿಳಿಸಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.